ಆಲೂರು ಪಟ್ಟಣದಲ್ಲಿ ಮಳೆಯಿಂದ ಬೀದಿಬದಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಶೆಡ್ ನಿರ್ಮಾಣ ಮಾಡಬೇಕೆಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ
ಆಲೂರು,16,2026 | ಕನ್ನಡಪೋಸ್ಟ್ ವರದಿ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೀದಿಬದಿ ವ್ಯಾಪಾರಿಗಳು ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಎರಡು ತಿಂಗಳ ಹಿಂದೆ ಸ್ವಚ್ಛತಾ ಕಾರ್ಯದ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳು ಹಾಕಿಕೊಂಡಿದ್ದ ಟೆಂಟ್ಗಳನ್ನು ತೆರವುಗೊಳಿಸಿದ್ದರಿಂದ ಇದೀಗ ಮಳೆಯ ಸಮಯದಲ್ಲಿ ವ್ಯಾಪಾರಿಗಳು ಬೀದಿಗೆ ಬಿದ್ದಿರುವ ಪರಿಸ್ಥಿತಿ ಎದುರಾಗಿದೆ.
ಮೂಲಗಳ ಪ್ರಕಾರ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಟೆಂಟ್ಗಳನ್ನು ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಗೆ ಶೀಘ್ರದಲ್ಲೇ ಶೆಡ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಇದುವರೆಗೆ ಯಾವುದೇ ಶೆಡ್ ವ್ಯವಸ್ಥೆ ಮಾಡದ ಕಾರಣ ಮಳೆಯ ವೇಳೆ ವ್ಯಾಪಾರಿಗಳಿಗೆ ತೀವ್ರ ತೊಂದರೆ ಉಂಟಾಗಿದೆ.
ಮಳೆ ಬಂದ ಪರಿಣಾಮ ಬೀದಿಬದಿ ವ್ಯಾಪಾರಿಗಳ ತರಕಾರಿ ಹಾಗೂ ಇತರ ವ್ಯಾಪಾರ ವಸ್ತುಗಳು ಹಾನಿಗೊಳಗಾಗಿವೆ. ಇದರಿಂದ ದಿನಸಿ ವ್ಯಾಪಾರ ನಡೆಸುವವರಿಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ತಕ್ಷಣ ಎಚ್ಚೆತ್ತುಕೊಂಡು ವ್ಯಾಪಾರಿಗಳಿಗೆ ಶೆಡ್ ನಿರ್ಮಿಸಿ ನೀಡಬೇಕು ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.










