ಸಕಲೇಶಪುರ: ಕೃಷಿ ಹೊಂಡದಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಹಲಸುಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರ ಮನೆಗಳಿಗೆ ಭೇಟಿ ನೀಡಿ ವೈಯುಕ್ತಿಕ ಪರಿಹಾರವನ್ನು ನೀಡಿದ ನಂತರ ಮಾತನಾಡಿ,ಬಾಲಕರು ಆಟವಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಬೇಸರದ ಸಂಗತಿಯಾಗಿದೆ.
ಮಕ್ಕಳ ಪೋಷಕರು ಕೂಲಿ ಕಾರ್ಮಿಕರಗಿದ್ದು ಅತ್ಯಂತ ಬಡವರಾಗಿದ್ದು ಈ ನಿಟ್ಟಿನಲ್ಲಿ ನಾನು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸ್ಥಳದಲ್ಲೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿರವರಿಗೆ ದೂರವಾಣಿ ಮುಖಾಂತರ ಮಾತನಾಡಿ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ಇದೆ ವೇಳೆ ಗ್ರಾಮಸ್ಥರು ಗ್ರಾಮದಲ್ಲಿರುವ ಅಂಗನವಾಡಿ ಶಿಕ್ಷಕಿಯ ವಿರುದ್ಧ ದೂರಿನ ಮಳೆಗರೆದರು ಸರಿಯಾದ ಸಮಯಕ್ಕೆ ಅಂಗನವಾಡಿಗೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ವಾರದಲ್ಲಿ ಮೂರು ನಾಲ್ಕು ದಿನ ಮಾತ್ರ ಅಂಗನವಾಡಿ ಬಾಗಿಲು ತೆರೆಯುತ್ತಾರೆ ಎಂದು ಶಾಸಕರಿಗೆ ತಿಳಿಸಿದರು.
ಇದಕ್ಕೆ ಸ್ಪಂದಿಸಿದ ಶಾಸಕರು ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಅವರಿಗೆ ದೂರವಾಣಿ ಕರೆ ಮಾಡಿ ಗ್ರಾಮಸ್ಥರ ದೂರಿಯನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇಂತಹ ದುರ್ಘಟನೆಗಳು ಮುಂದೆ ಸಂಭವಿಸದಂತೆ ವಿಧಾನಸಭಾ ಕ್ಷೇತ್ರದಲ್ಲಿರುವ ಖಾಸಗಿ ಹಾಗೂ ಸರ್ಕಾರಿ ಕೃಷಿಹೊಂಡಗಳ ಸುತ್ತ ಬೇಲಿ ನಿರ್ಮಿಸಿ ಗೇಟ್ ಅಳವಡಿಸುವಂತೆ ರೈತರು ಹಾಗೂ ಬೆಳೆಗಾರರಿಗೆ ಮನವಿ ಮಾಡಿದರು.
ಈ ಸಂರ್ಧಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.










