ಹಾಸನ: “ಪ್ರತಿವರ್ಷದಂತೆ ಈ ವರ್ಷವೂ ಹಾಸನಾಂಬೆ ದೇವಿಯ ದರ್ಶನಕ್ಕೆ ಬಂದಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೂವನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು —
“ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶಿವಲಿಂಗೇಗೌಡ ಹಾಗೂ ಜಿಲ್ಲಾಡಳಿತ ಅತ್ಯುತ್ತಮ ವ್ಯವಸ್ಥೆ ಮಾಡಿದೆ. ಎಲ್ಲರಿಗೂ ಧನ್ಯವಾದಗಳು,” ಎಂದರು.
ಜೆಡಿಎಸ್ ಶಾಸಕರಿಂದ ಬಂದಿರುವ ಅನುದಾನ ತಾರತಮ್ಯ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ,
“ಅವರು ಅಧಿಕಾರದಲ್ಲಿದ್ದಾಗ ಎಷ್ಟು ಅನುದಾನ ನೀಡಿದರು? ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ನಮ್ಮ ಶಾಸಕರಿಗೆ ಎಷ್ಟು ಹಣ ಕೊಟ್ಟರು? ಈಗ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ,” ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ವಿರುದ್ಧ ಕಿಡಿ ಹಚ್ಚಿದ ಅವರು, “ಅವರು ಇದ್ದಾಗ ಏನನ್ನೂ ಮಾಡಲಿಲ್ಲ. ನಾವು ಕೆಲಸ ಮಾಡ್ತಿದ್ದೇವೆ. ರಾಜ್ಯದ ಅಭಿವೃದ್ಧಿ ನಮ್ಮ ಗುರಿ,” ಎಂದು ಸ್ಪಷ್ಟಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಸಿಎಂ,
“ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೋರ್ಟ್ ಹೇಳಿದ ತಕ್ಷಣ ಚುನಾವಣೆ ಮಾಡುತ್ತೇವೆ. ಎಲ್ಲ ಚುನಾವಣೆಗಳನ್ನು ಹಂತ ಹಂತವಾಗಿ ನಡೆಸಲಾಗುವುದು. ಪ್ರಜಾಪ್ರಭುತ್ವ ಗಟ್ಟಿಯಾಗೋದು ಚುನಾವಣೆಗಳಿಂದ,” ಎಂದರು.
ಇತ್ತೀಚಿನ ಡಿನ್ನರ್ ಪಾರ್ಟಿ ವಿವಾದ ಕುರಿತು ಸ್ಪಷ್ಟನೆ ನೀಡಿದ ಸಿಎಂ, “ಆ ಔತಣ ಕೂಟಕ್ಕೆ ರಾಜಕೀಯ ಸಂಬಂಧ ಇಲ್ಲ. ನಾವು ಆಗಾಗ ಕೂಡಿ ಊಟ ಮಾಡುತ್ತೇವೆ. ಇದಕ್ಕೆ ರಾಜಕೀಯದ ಥಳುಕು ಹಾಕುವುದು ಬೇಡ,” ಎಂದರು.
ರಾಜ್ಯದಲ್ಲಿ ಆರ್ಎಸ್ಎಸ್ ಸಂಘಟನೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುವುದನ್ನು ತಡೆಯುವ ಸಂಬಂಧ ಕ್ರಮಗಳ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾವುದೇ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಡಬಾರದು. ತಮಿಳುನಾಡಿನಲ್ಲಿ ಕ್ರಮ ತೆಗೆದುಕೊಂಡಿದ್ದಾರೆ. ಅದನ್ನು ಪರಿಶೀಲಿಸಿ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ,” ಎಂದು ಹೇಳಿದರು.
ಸಂಪುಟ ಪುನರ್ರಚನೆ ಕುರಿತು ಕೇಳಿದ ಪ್ರಶ್ನೆಗೆ,
“ಮೊದಲು ಚುನಾವಣೆ ಮುಗಿಯಲಿ, ಆಮೇಲೆ ನೋಡೋಣ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.










