ಹಾಸನ: ಪ್ರಸ್ತುತ ಖಾಸಗಿ ಹಾಗೂ ಸರ್ಕಾರಿ ಉದ್ಯಮಗಳಲ್ಲಿ ಬಿಸಿಎ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗವಕಾಶಗಳು ದೊರೆಯುತ್ತಿದ್ದು, ವಿದ್ಯಾರ್ಥಿಗಳು ಉದ್ಯೋಗವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮಹಿಳಾ ಕಾಲೇಜು ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಹೇಳಿದರು.
ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕಯಂತ್ರ ವಿಭಾಗದಿಂದ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ, ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರಿಗೆ ಇಂದು ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಲು ಅವಕಾಶಗಳಿದ್ದು, ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು.
ಕೇವಲ ಕೆಲವೇ ಸೀಮಿತ ವಿಷಯಗಳನ್ನೇ ಆಯ್ಕೆ ಮಾಡಿಕೊಳ್ಳುವ ಬದಲಾಗಿದೆ ಪದವಿ ಹಂತದಲ್ಲಿ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಜೀವನದಲ್ಲಿ ಯಶಸ್ಸು ಕಾಣಲು ಯುವಕರು ಸಮಯಪ್ರಜ್ಞೆ ಇಟ್ಟುಕೊಂಡು ಮುನ್ನೆಡೆಯಬೇಕು. ಕಲಿಯುವುದನ್ನು ಆಸಕ್ತಿ ಮತ್ತು ಶ್ರದ್ಧೆಯಿಂದ ಕಲಿತರೆ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು.
ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕು ಮಾಡದೆ ಪದವಿ ಹಾಗೂ ಉನ್ನತ ವಿದ್ಯಾಭ್ಯಾಸ ಮಾಡುವುದರ ಮೂಲಕ ಹೆಣ್ಣು ಮಕ್ಕಳು ತಮ್ಮ ಜೀವನ ಕಟ್ಟಿಕೊಳ್ಳಬೇಕು. ತಾವುಗಳು ಕಲಿಯುವ ಜ್ಞಾನ, ವಿಷಯವನ್ನು ಇತರರಿಗೆ ಹಂಚಿಕೊಳ್ಳುವ ಮೂಲಕ ಎಲ್ಲರನ್ನೂ ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯಾರ್ಥಿನಿಯರು ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನದ ಕಡೆಗೆ ಹೆಚ್ಚು ಒತ್ತು ನೀಡಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಹೇಳಿದರು.
ಗಣಕಯಂತ್ರ ವಿಭಾಗದ ಮುಖ್ಯಸ್ಥ ಎಚ್.ಎಂ. ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐ.ಕ್ಯೂ.ಎ.ಸಿ. ಸಂಚಾಲಕ ಜಿ.ಆರ್. ಮೋಹನ್ ಕುಮಾರ್, ಉಪನ್ಯಾಸಕರಾದ ರಮೇಶ್, ಸಂದೀಪ್, ಪ್ರೀಯಾಂಕ, ವರ್ಷಿತ, ತೇಜಸ್ ಕುಮಾರ್, ಗೀತಾಂಜಲಿ, ಚೈತ್ರ, ಶೃತಿ ಹಾಗೂ ಇತರರು ಹಾಜರಿದ್ದರು.










