ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ, ಕೊಲೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಮೂವರು ಸಾಮಾಜಿಕ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ಗಿರೀಶ್ ಮಟ್ಟಣ್ಣವರ್ ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬಂಧಿಸಬೇಕಾಗುತ್ತದೆ ಎಂದು ಪೊಲೀಸರು ನೋಟಿಸ್ ನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ಹೇಳಿವೆ.
ಎಸ್ಐಟಿ ತನಿಖೆಯು ನಿರ್ಣಾಯಕ ಹಂತಕ್ಕೆ ಬಂದಿದ್ದು, ಮುಕ್ತಾಯದ ಹಂತದಲ್ಲಿದೆ ಎಂದು ಎಸ್ಐಟಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1995 ರಿಂದ 2014 ರವರೆಗೆ ದೇವಸ್ಥಾನದಲ್ಲಿ ಮಾಜಿ ಸ್ವಚ್ಛತ ಕೆಲಸಗಾರನಾಗಿದ್ದ ಚಿನ್ನಯ್ಯ ಅವರು 2002 ಮತ್ತು 2014 ರ ನಡುವೆ ದೇವಾಲಯದ ಆವರಣದಲ್ಲಿ 200 ಕ್ಕೂ ಹೆಚ್ಚು ಅಪರಿಚಿತ ಶವಗಳನ್ನು ರಹಸ್ಯವಾಗಿ ಹೂತ್ತಿಟ್ಟಿರುವುದಾಗಿ ಆರೋಪಿಸಿ 2025 ಆಗಸ್ಟ್ ನಲ್ಲಿ ದೂರು ದಾಖಲಿಸಿದ್ದರು. ಅಪಘಾತಗಳು, ಕೊಲೆ ಮತ್ತು ಅನುಮಾಸ್ಪಾದವಾಗಿ ಮೃತಪಟ್ಟವರನ್ನು ಮರಣೋತ್ತರ ಪರೀಕ್ಷೆ ಇಲ್ಲದೆ ಅಥವಾ ಪೊಲೀಸರ ವರದಿಯಿಲ್ಲದೆ ಹೂತು ಹಾಕಲಾಗಿದೆ ಎಂದು ಹೇಳಿದ್ದರು.
ಚಿನ್ನಯ್ಯ ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ ಮಾನವ ತಲೆಬುರುಡೆಯನ್ನು ಆ ಸ್ಥಳದಿಂದಲೇ ತರಲಾಗಿದೆ ಎಂಬ ಚಿನ್ನಯ್ಯ ಹೇಳಿಕೆ ದೇವಾಲಯದ ಲಕ್ಷಾಂತರ ವಾರ್ಷಿಕ ಭಕ್ತರಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತು.










