ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಶಿವಾನಂದ ತಗಡೂರು ಅವರೊಬ್ಬರು ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದ್ದು, ಶಿವಾನಂದ ತಗಡೂರು ಅವಿರೋಧ ಆಯ್ಕೆ ಖಚಿತಗೊಂಡಿದೆ.
ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ನವೆಂಬರ್ 9ರ ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ (ಟೆಲೆಕ್ಸ್)ತಿಳಿಸಿದ್ದಾರೆ.










