ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸ್ಕಾಲರ್ಸ್ ಶಾಲೆಯ ವಿದ್ಯಾರ್ಥಿಗಳು 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರ ಮತ್ತು ನಾಡಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಗೂ ನಾಡಗೀತೆಗಳೊಂದಿಗೆ ನಮನ ಸಲ್ಲಿಸಲಾಯಿತು. ಮಕ್ಕಳು ಕನ್ನಡದ ಪ್ರಥಮರು ಹಾಗೂ ಎಂಟು ಜ್ಞಾನಪೀಠ ಪುರಸ್ಕೃತರ ಬಗ್ಗೆ ಮಾತನಾಡಿ ಅವರ ಸಾಧನೆಯನ್ನು ಸ್ಮರಿಸಿದರು.
ಕನ್ನಡನಾಡಿನ ನದಿಗಳು, ಜಿಲ್ಲೆಗಳ ವೈಶಿಷ್ಟ್ಯಗಳ ಪರಿಚಯ ಹಾಗೂ ಭುವನೇಶ್ವರಿ ಸ್ತುತಿ ಗೀತೆಗಳಿಂದ ಕನ್ನಡಾಭಿಮಾನ ಮೆರೆದರು. ಹಂಪೆಯ ವೈಭವವನ್ನು ವರ್ಣಿಸುವ ನೃತ್ಯ ಪ್ರದರ್ಶನ ಎಲ್ಲರ ಮನ ಸೆಳೆಯಿತು.
ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಅಂದವಾದ ಬರವಣಿಗೆ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬೊಮ್ಮೇಗೌಡ, ಸಂಘಟನಾ ಕಾರ್ಯದರ್ಶಿ ಡಾ. ಎಚ್.ಎನ್. ಚಂದ್ರಶೇಖರ್, ನೌಕರ ಸಂಘದ ಮಾಜಿ ಅಧ್ಯಕ್ಷ ಕೆ.ಎಲ್. ಶ್ರೀನಿವಾಸ್, ಲಿಪಿಕ ನೌಕರರ ಸಂಘದ ಅಧ್ಯಕ್ಷ ಬಿ.ಎನ್. ಜಯರಾಮ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.










