ಚನ್ನರಾಯಪಟ್ಟಣ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಶನಿವಾರ ರಾತ್ರಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಣವು ಸಮಾಜದ ಬದಲಾವಣೆಯ ದಿಕ್ಸೂಚಿ ಎಂದು ಆಶೀರ್ವಚನ ನೀಡಿದರು.
ಶಾಲೆಯಲ್ಲಿ ಸಿಗುವ ಮೌಲ್ಯಯುತ ಶಿಕ್ಷಣದ ಜೊತೆಗೆ ಮನೆಯಲ್ಲಿ ಪಾಲಕರು ನೀಡುವ ಸಂಸ್ಕಾರವು ಮಕ್ಕಳ ಬದುಕಿನ ಭವಿಷ್ಯಕ್ಕೆ ದಾರಿದೀಪವಾಗಲಿದೆ. ಸಂಸ್ಕಾರವಿಲ್ಲದ ಕೇವಲ ಶಿಕ್ಷಣ ಸಿಕ್ಕರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.
ಯಾವುದೇ ವ್ಯಕ್ತಿಯ ಧರ್ಮ, ಜಾತಿ ಹಾಗೂ ಧರಿಸಿರುವ ಬಟ್ಟೆಯನ್ನು ನೋಡಿ ಅಳೆಯಬಾರದು. ಮೌಲ್ಯಯುತ ಗುಣಗಳು ಹಾಗೂ ಮಾನವೀಯತೆಯ ವ್ಯಕ್ತಿತ್ವವನ್ನು ಗುರುತಿಸಿ ಗೌರವ ನೀಡಬೇಕು. ಅದೆಷ್ಟೇ ಹಣ ಮತ್ತು ಜಾತಿ ಸಂಪಾದಿಸಿದರೂ ಧರ್ಮ ಕಾರ್ಯಗಳಿಗೆ ವಿನಿಯೋಗವಾಗದಿದ್ದರೆ ಅದು ವ್ಯರ್ಥವೇ ಸರಿ ಎಂದು ತಿಳಿಸಿದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಆಡಳಿತತಧಿಕಾರಿ ಡಾ.ಎ.ಟಿ.ಶಿವರಾಮ್ ಮಾತನಾಡಿ, ಮೌಲ್ಯಾಧಾರಿತ ಶಿಕ್ಷಣ ಸಿಗದೇ ಶೈಕ್ಷಣಿಕ ವ್ಯವಸ್ಥೆ ಪೂರ್ಣಗೊಳ್ಳುವುದಿಲ್ಲ. ಬದುಕು ಸಹ ಮಧ್ಯಾಂತರದಲ್ಲಿ ತಟಸ್ಥವಾಗಿ ನಿಲ್ಲಲಿದೆ. ಆದ್ದರಿಂದ ಗುಣಮಟ್ಟದ ಮೌಲ್ಯಯುತ ಶಿಕ್ಷಣದ ಜೊತೆಗೆ ಸಂಸ್ಕಾರ ಸಿಕ್ಕರೆ ಮಾತ್ರ ವಿದ್ಯಾರ್ಥಿಗಳ ಬದುಕು ಹಸನಾಗಲು ಸಾಧ್ಯ ಎಂದರು.
2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವ್ಯಾಪ್ತಿಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ನಂತರ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀಕ್ಷೇತ್ರ ಕಬ್ಬಳಿ ಶಾಖಾ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಗುಡಿಗೌಡ ಪ್ರಕಾಶ್, ಬಿಆರ್ ಸಿ ಅನಿಲ್, ಇಸಿಓ ಶ್ರೀನಿವಾಸ್, ಮುಖ್ಯಶಿಕ್ಷಕ ಟಿ.ತಿಮ್ಮೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಿವನಂಜೇಗೌಡ, ಎನ್ .ಆರ್.ರತ್ನರಾಜ್, ಪ್ರಮುಖರಾದ ಹೊನ್ನೇಗೌಡ, ಶಿಕ್ಷಕ ವೃಂದ, ಪಾಲಕರು ಹಾಗೂ ಇತರರು ಇದ್ದರು.
ಇಂದಿನ ಕಾರ್ಯಕ್ರಮಗಳು: ನ.3 ಸೋಮವಾರ ಬೆಳಗ್ಗೆ ಚುಂಚಶ್ರೀಗಳ ದಿವ್ಯಸಾನಿಧ್ಯದಲ್ಲಿ ಬೆಂಗಳೂರಿನ ಉದ್ಯಮಿ ಪ್ರದೀಪಾ ವೆಂಕಟೇಶ ಪ್ರಸಾದ್ ಕುಟುಂಬದವರಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಲಿದೆ.
ಸಂಜೆ ಶ್ರೀ ಬಸವೇಶ್ವರಸ್ವಾಮಿ ಸರ್ಪೋತ್ಸವ, ಶ್ರೀ ಚೌಡೇಶ್ವರಿದೇವಿ ಉತ್ಸವ, ಜಗದ್ಗುರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುತ್ತಳಿಕೆ, ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಮುತ್ತಿನ ಪಲ್ಲಕ್ಕಿ ಉತ್ಸವದ ನಂತರ ದೇಗುಲದ ಆವರಣದಲ್ಲಿರುವ ಪುಷ್ಕರಣಿಯಲ್ಲಿ ಚುಂಚಶ್ರೀಗಳ ತೆಪ್ಪೋತ್ಸವ ವೈಭವದಿಂದ ಸಾಗಲಿದೆ. ಧಾರ್ಮಿಕ ಸಭೆ ಹಾಗೂ ಚುಂಚಶ್ರೀಗಳಿಗೆ ಪುಷ್ಪ ವೃಷ್ಟಿ ನಡೆಯಲಿದೆ.










