ಸಕಲೇಶಪುರ : ದೇಶ ಅಭಿವದ್ಧಿ ಹೊಂದುತ್ತಿರುವ ರಾಷ್ಟ್ರ ಗಳ ಸಾಲಿನಲ್ಲಿ ಸೇರ್ಪಡೆಯಾಗಲು ಕಾರ್ಮಿಕರ ಶ್ರಮವೇ ಕಾರಣವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಶುಕ್ರವಾರ ಪಟ್ಟಣದ ಪುರ ಭವನದಲ್ಲಿ ಏರ್ಪಡಿಸಿದ ಬ್ರಿಡ್ಜ್ ಕೋರ್ಸ್ ತರಬೇತಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.
ದೇಶದ ಆರ್ಥಿಕ ಅಭಿವದ್ಧಿಯಲ್ಲಿ ಕಾರ್ಮಿಕರ ಶ್ರಮ ನಿರ್ಣಾಯಕ ಪಾತ್ರ ವಹಿಸುತ್ತದೆ.
ಇಂತಹ ಕಾರ್ಮಿಕರ ನೆರವಿಗಾಗಿ ಹಲವು ಕಾನೂನುಗಳನ್ನು ರಚಿಸಲಾಗಿದ್ದು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಸಂಭವಿಸುವ ಅವಘಡಗಳು ಹಾಗೂ ಕಾರ್ಮಿಕರ ಉದ್ಯೋಗ ಭದ್ರತೆ ಯಲ್ಲಿ ಕಾನೂನುಗಳು ಕಾರ್ಮಿಕರಿಗೆ ನೆರವಾಗಲಿವೆ ಎಂದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಮಿಕರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಪಿಂಚಣಿ, ಟೂಲ್ ಕಿಟ್, ಮಹಿಳೆಯರಿಗೆ ಹೆರಿಗೆ ಸೌಲಭ್ಯ, ವಿವಾಹ ಹಾಗೂ ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ ವೈದ್ಯಕೀಯ ಸಹಾಯಧನ ಅಪಘಾತ ಪರಿಹಾರ ಸೌಲಭ್ಯ ಒದಗಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಲು ಜಾಗೃತರಾಗಬೇಕು. ಸರ್ಕಾರ ನಿಮ್ಮ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆಗಳ ಪ್ರಯೋಜನ ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಆರೋಗ್ಯ, ಮದುವೆ, ಹೆರಿಗೆ, ಮಕ್ಕಳಿಗೆ ಶಿಕ್ಷಣ, ವೈದ್ಯಕೀಯ ನೆರವು ಸೇರಿ ಎಲ್ಲ ಹಂತದಲ್ಲೂ ಸರ್ಕಾರಗಳು ಕಾರ್ಮಿಕರ ಬೆನ್ನಿಗೆ ನಿಂತಿದೆ. ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು.
ಶಿಕ್ಷಣವನ್ನೇ ಅವರಿಗೆ ಸಂಪತ್ತನ್ನಾಗಿ ನೀಡಬೇಕು ಎಂದರು. ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಯಮುನಾ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಿದರು.
ಈ ಸಂಧರ್ಭದಲ್ಲಿ ಅನಿಕೇತನ ಸಂಸ್ಥೆ ಮುಖ್ಯಸ್ಥ ರಾದ ಕಾರ್ತೀಕ್, ಆಲೂರು ಹಿರಿಯ ಕಾರ್ಮಿಕ ನಿರೀಕ್ಷಕ ಆನಂದ್ ರಾಮ್, ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ರಘು, ಇಲಾಖೆಯ ಜಯರಾಮ್ ಉಪಸ್ಥಿತರಿದ್ದರು.










