ಬೆಂಗಳೂರು : 35ರ ಟೆಕ್ಕಿ ಮೇಲೆ 18ರ ಯುವಕನಿಗೆ ಲವ್: ಕೊನೆಗೂ ಬಯಲಾಯ್ತು ಶರ್ಮಿಳಾ ಸಾವಿನ ರಹಸ್ಯ!

ಬೆಂಗಳೂರು : ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವಿನ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಪೂರ್ವನಿಯೋಜಿತ ಕೊಲೆ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶರ್ಮಿಳಾರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ.

ಶರ್ಮಿಳಾ ಯಾರು?

ಮೃತ ಶರ್ಮಿಳಾ (34) ಮಂಗಳೂರು ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.

ಘಟನೆ ಹೇಗಿತ್ತು?

ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮನೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದಟ್ಟವಾದ ಹೊಗೆ ಮನೆ ತುಂಬಿಕೊಂಡಿದ್ದು, ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿತ್ತು.

ಕತ್ತಲೆ ಮತ್ತು ಹೊಗೆಯಿಂದಾಗಿ ಹೊರಬರಲು ಸಾಧ್ಯವಾಗದೆ ಶರ್ಮಿಳಾ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ಹೇಳಲಾಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಮೊದಲಿಗೆ ಶಾರ್ಟ್ ಸರ್ಕ್ಯೂಟ್ ಶಂಕೆ

ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಅನುಮಾನಿಸಿದ್ದರು. ಸೋಕೋ ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ (FSL) ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.

ತನಿಖೆಯಲ್ಲಿ ಸ್ಪೋಟಕ ಟ್ವಿಸ್ಟ್

ಆದರೆ ಮರಣೋತ್ತರ ಪರೀಕ್ಷೆ ವರದಿ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಶರ್ಮಿಳಾ ಸಾವು ಅಪಘಾತವಲ್ಲ, ಕೊಲೆ ಎಂಬುದು ದೃಢಪಟ್ಟಿದೆ. ತನಿಖೆ ವೇಳೆ ಶರ್ಮಿಳಾ ಜೀವನದಲ್ಲಿ ಕರ್ನಲ್ ಕುರೈ ಎಂಬ ಯುವಕನ ಪಾತ್ರ ಬೆಳಕಿಗೆ ಬಂದಿದೆ.

ಆರೋಪಿ ಕರ್ನಲ್ ಕುರೈ ಶರ್ಮಿಳಾ ಮನೆ ಪಕ್ಕದಲ್ಲೇ ವಾಸವಾಗಿದ್ದು, ಆಕೆಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದನು. ಆದರೆ ಈ ವಿಚಾರ ಶರ್ಮಿಳಾಗೆ ತಿಳಿದಿರಲಿಲ್ಲ. ಬೆಂಕಿ ಅವಘಡದಂತೆ ತೋರಿಸಿ ಕೊಲೆಯನ್ನು ಮುಚ್ಚಿಹಾಕಲು ಆರೋಪಿ ಯತ್ನಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆರೋಪಿ ಬಂಧನ

ಸಾಕ್ಷ್ಯಾಧಾರಗಳ ಆಧಾರದಲ್ಲಿ ಪೊಲೀಸರು ಕೇರಳ ಮೂಲದ ಆರೋಪಿ ಕರ್ನಲ್ ಕುರೈಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ತೀವ್ರ ವಿಚಾರಣೆ ನಡೆಯುತ್ತಿದ್ದು, ಕೊಲೆಗೆ ಕಾರಣ, ಘಟನೆ ನಡೆದ ವಿಧಾನ ಹಾಗೂ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಆರಂಭದಲ್ಲಿ ಅಪಘಾತದಂತೆ ಕಂಡ ಈ ಪ್ರಕರಣ, ತನಿಖೆ ಮುಂದುವರಿದಂತೆ ಕೊಲೆ ಎಂಬ ಸತ್ಯ ಬಹಿರಂಗವಾಗಿದ್ದು, ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಶೀಘ್ರದಲ್ಲೇ ಸಂಪೂರ್ಣ ಪ್ರಕರಣದ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.