Hassan|ಹಾಸನ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು 6 ವರ್ಷದ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿಟ್ಟಗೌಡನಹಳ್ಳಿಯ ದೇವೇಗೌಡ ನಗರದ ಬಳಿ ನಡೆದಿದೆ. ಘಟನೆಯಲ್ಲಿ ಪತ್ನಿ ಹಾಗೂ ಮತ್ತೋರ್ವ ಮಗನಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಜಯಣ್ಣ (38) ಹಾಗೂ ಅವರ ಪುತ್ರ ಮಿಥುನ್ ರೈ (6) ಎಂದು ಗುರುತಿಸಲಾಗಿದೆ. ಜಯಣ್ಣ ಅವರ ಪತ್ನಿ ರಜಿನಿ ಮತ್ತು ಮತ್ತೋರ್ವ ಮಗ ಮಿಲನ್ ಜೈ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಘಟನೆಯ ಹಿನ್ನೆಲೆ:
ಮೂಲತಃ ಗೊರೂರಿನವರಾದ ಜಯಣ್ಣ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ನಲ್ಲಿ (KA-13 EE-5053) ಹಾಸನಕ್ಕೆ ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಗೊರೂರಿಗೆ ತಮ್ಮ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಅಪಘಾತ ಸಂಭವಿಸಿದ್ದು ಹೇಗೆ?:
ಜಯಣ್ಣ ಅವರ ಕುಟುಂಬ ಬೈಕ್ನಲ್ಲಿ ಹೋಗುತ್ತಿದ್ದಾಗ, ಅರಕಲಗೂಡು ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಟಾಟಾ ಟಿಯಾಗೋ ಕಾರು (KA-13 P-4638) ವಾಹನವೊಂದನ್ನು ಹಿಂದಿಕ್ಕಲು (ಓವರ್ಟೇಕ್) ಯತ್ನಿಸಿದೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ 6 ವರ್ಷದ ಬಾಲಕ ಮಿಥುನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಜಯಣ್ಣ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳಾದ ರಜಿನಿ ಹಾಗೂ ಮಿಲನ್ ಜೈ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










