ಬೆಂಗಳೂರು: ಬರಪಟ್ಟಿಗೆ 5 ತಾಲೂಕು ಅರಕಲಗೂಡು, ಅರಸೀಕೆರೆ, ಚ.ರಾ.ಪಟ್ಟಣ, ಹಾಸನ, ಹೊ.ನ.ಪುರ

ಬೆಂಗಳೂರು: ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟಿದ್ದು, ಕರ್ನಾಟಕ ಸರ್ಕಾರವು ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಅದರಲ್ಲಿ 89 ತಾಲೂಕು ತೀವ್ರ ಬರ ಹಾಗೂ 12 ತಾಲೂಕುಗಳಲ್ಲಿ ಸಾಧಾರಣ ಬರ ಎಂದು ವರ್ಗೀಕರಿಸಲಾಗಿದೆ.

ಈ ಬಗ್ಗೆ ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ ಜಿ ಪರಮೇಶ್ವರ್ ಗುರುವಾರ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯವು ಪ್ರಸ್ತುತ ಸಾಲಿನಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, 1976ರ ನಂತರ ಇದೇ ಮೊದಲ ಬಾರಿಗೆ ಇಂತಹ ಭೀಕರ ಬರಗಾಲ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.ಶೇ.30 ರಷ್ಟು ಮಳೆ ಕೊರತೆ: ಜೂನ್ 1 ರಿಂದ ಆಗಸ್ಟ್ 26ರ ವರೆಗಿನ ಅಂಕಿ-ಅAಶಗಳ ಪ್ರಕಾರ, ರಾಜ್ಯದಲ್ಲಿ ವಾಡಿಕೆಯಾಗಿ 666 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಕೇವಲ 465 ಮಿ.ಮೀ ಮಳೆಯಾಗಿದ್ದು, ಶೇ.30 ರಷ್ಟು ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.41, ಮಲೆನಾಡಿನಲ್ಲಿ ಶೇ.35, ಉತ್ತರ ಒಳನಾಡಿನಲ್ಲಿ ಶೇ.31, ಕರಾವಳಿಯಲ್ಲಿ ಶೇ.24 ರಷ್ಟು ಮಳೆ ಕೊರತೆ ದಾಖಲಾಗಿದೆ. ಒಟ್ಟಾರೆ ರಾಜ್ಯದ 29 ಜಿಲ್ಲೆಗಳ 190 ತಾಲೂಕುಗಳು ಮಳೆ ಕೊರತೆ ವ್ಯಾಪ್ತಿಯಲ್ಲಿದ್ದು, 134 ತಾಲೂಕುಗಳು ಸತತ 3-4 ವಾರಗಳ ಕಾಲ ಒಣಹವೆ ಎದುರಿಸಿವೆ ಎಂದು ತಿಳಿಸಿದರು.

101 ತಾಲೂಕುಗಳು ಬರಪೀಡಿತ: ಕೇಂದ್ರ ಸರ್ಕಾರದ ಬರ ಕೈಪಿಡಿ-2020ರ ಮಾರ್ಗಸೂಚಿಯಂತೆ ಟ್ರಿಗರ್-1 ಅಡಿಯಲ್ಲಿ 134 ತಾಲೂಕುಗಳು ಅರ್ಹತೆ ಪಡೆದಿದ್ದವು. ಇದರಲ್ಲಿ ಬೆಳೆಗಳ ಸ್ಥಿತಿಗತಿ, ತೇವಾಂಶ ಮತ್ತಿತರ ಅಂಶಗಳನ್ನು ಆಧರಿಸಿ ಗ್ರೌಂಡ್ ಟ್ರೂಥಿಂಗ್ ಮಾಡಿದ ಬಳಿಕ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 89 ತಾಲೂಕುಗಳಲ್ಲಿ ತೀವ್ರ ಹಾಗೂ 12 ತಾಲೂಕುಗಳಲ್ಲಿ ಸಾಧಾರಣ ಬರ ಇದೆ. ಉಳಿದ 32 ತಾಲೂಕುಗಳ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಮಳೆಯಿಲ್ಲದೆ ಬಿತ್ತನೆ ಮಾಡಲು ಸಾಧ್ಯವಾಗದ ರೈತರಿಗೂ ಬೆಳೆ ವಿಮೆ ಅಡಿ ಬಿತ್ತನೆ ತಡೆ ವಿಶೇಷ ಅವಕಾಶದಡಿ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರೈತರು ವಿಮೆಗೆ ಅರ್ಜಿ ಸಲ್ಲಿಸಲು ಆ. 31ರವರೆಗೆ ಕೊನೆಯ ದಿನಾಂಕ ವಿಸ್ತರಿಸಲಾಗಿದ್ದು, ರೈತರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸರ್ಕಾರ ಪರವಾಗಿ ಮನವಿ ಮಾಡಿದರು.
ಕೇಂದ್ರಕ್ಕೆ ಶೀಘ್ರವೇ ಮನವಿ: ಬರಪೀಡಿತ ತಾಲೂಕುಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಯಂತೆ ಕುಡಿಯುವ ನೀರಿಗೆ ಖರ್ಚು ಮಾಡಲು ಅವಕಾಶವಿದ್ದು, ಬೆಳೆ ಹಾನಿ ಪರಿಹಾರಕ್ಕಾಗಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಮುಂದಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಲ್ಲದೆ, ನೀರಿನ ಸೌಲಭ್ಯವಿರುವ ರೈತರು ಮೂಕ ಪ್ರಾಣಿಗಳ ಹಿತದೃಷ್ಟಿ ಯಿಂದ ಮೇವು ಬೆಳೆಯುವಂತೆಯೂ ಕಂದಾಯ ಸಚಿವರು ವಿನಂತಿಸಿದರು.

  • ಹಾಸನ ಜಿಲ್ಲೆಯಲ್ಲಿ ಅರಕಲಗೂಡು, ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂತೆಯೇ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು, ಹನೂರು, ಮೈಸೂರಿನ ಎಚ್.ಡಿ.ಕೋಟೆ , ಹುಣಸೂರು, ಕೆ.ಆರ್.ನಗರ, ಮೈಸೂರು, ನಂಜನಗೂಡು, ಟಿ.ನರಸೀಪುರ, ಸರಗೂರು, ಸಾಲಿಗ್ರಾಮ
    ಮಂಡ್ಯಜಿಲ್ಲೆಯ ಕೆ.ಆರ್.ಪೇಟೆ, ಮಳವಳ್ಳಿ, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರು, ಪಾಂಡವಪುರ, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ
    ಕೊಡಗಿನ ಸೋಮವಾರಪೇಟೆ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ.