ಚನ್ನರಾಯಪಟ್ಟಣ: ಧಾರ್ಮಿಕ ಕಾರ್ಯಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಸಿಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ತಾಲೂಕಿನ ಮುದ್ದನಹಳ್ಳಿ ಗ್ರಾಮದಲ್ಲಿ ನೆರವೇರಿದ ಶ್ರೀ ಚಿಕ್ಕಮ್ಮದೇವಿ ದೇವಾಲಯ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಕಳಸಾರೋಃಣ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇವಾಲಯ ನಿರ್ಮಾಣ ಹಾಗೂ ಪ್ರತಿದಿನ ಪೂಜೆ ನಡೆಸುವುದರ ಜೊತೆಯಲ್ಲಿ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಭಕ್ತರಲ್ಲಿ ಭಕ್ತಿ ಭಾವನೆ ಹೆಚ್ಚಾಗಲಿದೆ. ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು ಹಾಗ ಡೈರಿ ಕಟ್ಟಡಕ್ಕೆ ಅನುದಾನ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಈಗಾಗಲೇ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಸಂಸದ ಶ್ರೇಯಸ್ ಎಂ.ಪಟೇಲ್ ಮಾತನಾಡಿ, ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ದೇವಾಲಯವನ್ನು ನಿರ್ಮಾಣ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ದೇವಾಲಯದ ಅಭಿವೃದ್ಧಿ ಕೆಲಸಗಳಿಗೆ ಅಗತ್ಯ ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿದರು. ನೂತನ ದೇವಾಲಯ ಲೋಕಾರ್ಪಣೆ ಅಂಗವಾಗಿ ಭಾನುವಾರ ಜಿಲ್ಲೆಯಲ್ಲೇ ಇದೆ ಮೊದಲ ಬಾರಿಗೆ ಗ್ರಾಮದಲ್ಲಿ ಶ್ವಾನಗಳ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಂದ ಭರತನಾಟ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳು:
ಮುಂಜಾನೆಯೇ ದೇಗುಲಕ್ಕೆ ಹಸಿರು ಚಪ್ಪರ ಹಾಕಲಾಗಿದ್ದು, ವಿಘ್ನೇಶ್ವರ ಮತ್ತು ಗಂಗೆ ಪೂಜೆ, ಗೋಪೂಜೆ, ನವಗ್ರಹ ಹೋಮ, ಗಣ ಹೋಮ, ಪೂರ್ಣಾಹುತಿ ಬಳಿಕ ಮಹಾ ಮಂಗಳಾರತಿ ನೆರವೇರಿತು. ಅನ್ನದಾಸೋಹ ನಡೆಯಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಸಿ.ಆನಂದ್ ಕುಮಾರ್, ಪುರಸಭಾ ಮಾಜಿ ಅಧ್ಯಕ್ಷರಾದ ಶಶಿಧರ್, ರವೀಶ್(ಕಡ್ಡಿಪುಡಿ) ಮುಖಂಡರಾದ ಕಾರೇಕೆರೆ ಪ್ರಕಾಶ್, ಕುಮಾರ್, ಶಿಕ್ಷಕರಾದ ಭಾಗ್ಯಮ್ಮ, ರೇವಣ್ಣ ಸ್ವಾಮಿ ಹಾಗೂ ಗ್ರಾಮಸ್ಥರು ಹಾಜರಿದ್ದರು.










