ಹಾಸನ, ಜೂನ್ 26: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ತಡರಾತ್ರಿ ಮರಗಳೊಂದಿಗೆ ಗುಡ್ಡವು ರಸ್ತೆಗೆ ಅಡ್ಡಲಾಗಿ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಈ ಘಟನೆಯಿಂದಾಗಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಗಂಟೆಗಟ್ಟಲೆ ಸಿಲುಕಿ ಪರದಾಡುವಂತಾಗಿದೆ. ಸ್ಥಳೀಯ ಆಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಯಾಣಿಕರಿಗೆ ಸೂಚನೆ:
– ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳು ಚಾರ್ಮಾಡಿಘಾಟ್ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.
– ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಮಾರನಹಳ್ಳಿ ಹಾರ್ಲೆ ಮಾರ್ಗವಾಗಿ ಸಂಚರಿಸುವಂತೆ ಸಲಹೆ ನೀಡಲಾಗಿದೆ.
ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಿ ಸುರಕ್ಷಿತವಾಗಿ ಪ್ರಯಾಣಿಸಲು ಕೋರಲಾಗಿದೆ. ರಸ್ತೆ ತೆರವುಗೊಳಿಸುವ ಕಾರ್ಯ ಚುರುಕುಗೊಂಡಿದ್ದು, ಶೀಘ್ರದಲ್ಲಿ ಸಂಚಾರ ಸುಗಮಗೊಳ್ಳುವ ನಿರೀಕ್ಷೆಯಿದೆ.










