ಚನ್ನರಾಯಪಟ್ಟಣ: ತಾಲ್ಲೂಕಿನ ಹಿರೀಸಾವೆ ಗ್ರಾಮದ ಶ್ರೀ ಮಂಜುನಾಥಸ್ವಾಮಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ್(ಕೇಶವ್) ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಜರುಗಿದ್ದು ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಸ್ವಾಮಿ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾ ಅಧಿಕಾರಿ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಯಾವುದೇ ಸಂಘ ಸಂಸ್ಥೆಗಳು ಪಾರದರ್ಶಕ ವ್ಯವಹಾರ ಹೊಂದಿದ್ದಲ್ಲಿ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ ಎಂದರು.
ಸಂಘದ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು. ಹೆಚ್ಚಿನ ಲಾಭಗಳಿಸುವುದರ ಜೊತೆಗೆ ಸದಸ್ಯರ ಕ್ಷೇಮಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ರಾಜಶೇಖರ್ ಹಾಗೂ ಅಣ್ಣಸ್ವಾಮಿ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.
ಕಾರ್ಯದರ್ಶಿಆರ್.ಎನ್.ಸ್ವಾಮಿ, ಖಜಾಂಚಿ ಕೃಷ್ಣ, ನಿಕಟ ಪೂರ್ವ ಅಧ್ಯಕ್ಷ ಕಾಂತರಾಜು, ನಿರ್ದೇಶಕರಾದ ಅರುಣ, ನಾಗರಾಜು, ರಮ್ಯಾ, ಮಂಜು, ಲತಾ, ಮಂಜು, ನವೀನ್ ಹಾಗೂ ಇತರರು ಇದ್ದರು.










