ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ರಾಜಕೀಯ ದ್ವೇಷದಿಂದ ದೀರ್ಘಕಾಲದಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ ಎಂಬುದನ್ನು ಈ ಬೆಳವಣಿಗೆ ಸೂಚಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಗಾಂಧಿ ಕುಟುಂಬಕ್ಕೆ ಕಿರುಕುಳ ಮಾಡುವುದು ಮತ್ತು ವಿರೋಧ ಪಕ್ಷಗಳನ್ನು ಗುರಿಯಾಗಿಸುವುದು ಈ ಪ್ರಕರಣದ ಉದ್ದೇಶವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಟೀಕಿಸಿದರು.
ರಾಜಕೀಯ ಉದ್ದೇಶಕ್ಕೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಯನ್ನು ಇಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸಹ ಬಿಜೆಪಿಯ ಸೇಡಿನ ರಾಜಕೀಯ ಎಂದು ಪುನರುಚ್ಛರಿಸಿದರು. ವಿರೋಧ ಪಕ್ಷದ ನಾಯಕರನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿರುವ ಬಿಜೆಪಿ ವಿರುದ್ಧ ದೇಶಾದ್ಯಂತ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು.
ನಾವು ಬಿಜೆಪಿಯ ಸೇಡಿನ ರಾಜಕೀಯವನ್ನು ಬಹಿರಂಗಪಡಿಸುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರು ಉದ್ರಿಕ್ತರಾಗಿದ್ದು, ಭಾರತದಾದ್ಯಂತ ತನ್ನ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.
ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯ (ED) ಹೂಡಿರುವ ಹಣ ವರ್ಗಾವಣೆ ಆರೋಪಗಳನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಈ ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಿಸಿದೆ. ಆದ್ದರಿಂದ ಪ್ರಕರಣದಲ್ಲಿ ED ಯ ವಾದಗಳ ಮೇಲೆ ಅರ್ಹತೆಯ ಆಧಾರದ ಮೇಲೆ ತೀರ್ಪು ನೀಡುವುದು ಅಕಾಲಿಕವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪಕ್ಷದ ದಿವಂಗತ ನಾಯಕರಾದ ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯನ್ ಎಂಬ ಖಾಸಗಿ ಕಂಪನಿಯನ್ನು ಪಿತೂರಿ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಗೆ ಸೇರಿದ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಯಂಗ್ ಇಂಡಿಯನ್ನಲ್ಲಿ ಸೋನಿಯಾ ಗಾಂಧಿ ಕುಟುಂಬವು ಬಹುಪಾಲು ಶೇಕಡಾ 76 ರಷ್ಟು ಷೇರುಗಳನ್ನು ಹೊಂದಿದ್ದು, ಇದು 90 ಕೋಟಿ ರೂಪಾಯಿ ಸಾಲಕ್ಕೆ ಬದಲಾಗಿ AJL ನ ಆಸ್ತಿಗಳನ್ನು ವಂಚನೆಯಿಂದ ಕಸಿದುಕೊಂಡಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.
Congress has welcomed the trial court’s refusal to entertain the complaint filed by the Enforcement Directorate (ED) in the National Herald case.










