ಹಾಸನ: ಪಕ್ಷಕ್ಕಾಗಿ ನಿಷ್ಠ್ಠೆಯಿಂದ ದುಡಿಯುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸೇವೆ ಪರಿಗಣಿಸಿ, ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ನೇಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ದೇವರಾಜೇಗೌಡ ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಮ್ಮ ಬೇಡಿಕೆ ಯಾವುದೇ ಸಮುದಾಯ ಅಥವಾ ವ್ಯಕ್ತಿಯ ವಿರುದ್ಧವಲ್ಲ, ರಾಜ್ಯದ ಎಲ್ಲ ವರ್ಗಗಳ ಹಿತಕ್ಕಾಗಿ, ಒಮ್ಮತದ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ನಿಟ್ಟಿನಲ್ಲಿ ಒಕ್ಕಲಿಗ ಸಮಾಜದ ಮಹಾ ಗುರುಗಳಾದ ಶ್ರೀ ಆದಿಚುಂಚನಗಿರಿ ಸ್ವಾಮೀಜಿ ಹಾಗೂ ರಾಜ್ಯ ಒಕ್ಕಲಿಗ ಸಂಘವೂ ಬೆಂಬಲ ವ್ಯಕ್ತಪಡಿಸಿದೆ ಎಂದರು.
ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಪ್ರವಾಹದಿಂದ ಉಂಟಾದ ಭಾರೀ ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ತಕ್ಷಣ ನೆರವಿಗೆ ಧಾವಿಸಿರುವುದು ಪ್ರಶಂಸನೀಯ. ವಿಶೇಷ ಪ್ಯಾಕೇಜ್ ರೂಪದಲ್ಲಿ 1033.60 ಕೋಟಿ ಮಂಜೂರು ಮಾಡಿ, ಸುಮಾರು 14.24 ಲಕ್ಷ ರೈತರಿಗೆ ನೆರವು ನೀಡಲು ಮುಖ್ಯಮಂತ್ರಿಗಳು ತೀರ್ಮಾನಿಸಿರುವುದು ರೈತರ ಬದುಕಿಗೆ ಬಲವಾಗಿದೆ ಎಂದರು. ಅದೇ ರೀತಿ ಕೇಂದ್ರ ಸರ್ಕಾರವೂ ರಾಜ್ಯದ ಬೇಡಿಕೆಗೆ ಸ್ಪಂದಿಸಿ ಪರಿಹಾರ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಡಿ.6 ರಂದು ಸಿಎಂ ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿದ್ದು, ಸರಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬಹಿರಂಗ ಭಾಷಣ ಮಾಡಲಿದ್ದಾರೆ. ಅಂದೇ ಸೂಪರ್ ಸ್ಪಷಾಲಿಟಿ ಆಸ್ಪತ್ರೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸುವರು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಗಿರೀಶ್, ಶಿವಕುಮಾರ್, ಕುಮಾರ್ಶೆಟ್ಟಿ, ಸುರೇಶ್, ಸುಜಿತ್ ಹಾಜರಿದ್ದರು.










