ಚನ್ನರಾಯಪಟ್ಟಣ: ಮೌಲ್ಯಯುತ ಶಿಕ್ಷಣದ ಜೊತೆಗೆ ವಿವೇಕತೆ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು
ತಾಲ್ಲೂಕಿನ ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ರೆಡ್ ರಿಬ್ಬನ್ ಹಾಗೂ ಇತರೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಶಿಕ್ಷಣವು ಬದುಕಿನ ಮೆಟ್ಟಿಲು ಎಂದರು. ತಾಲೂಕಿನಲ್ಲಿರುವ ಸರ್ಕಾರಿ ಹಿರಿಯ, ಕಿರಿಯ, ಪ್ರೌಢಶಾಲೆ ಹಾಗೂ ಕಾಲೇಜುಗಳ ಶೈಕ್ಷಣಿಕ ವ್ಯವಸ್ಥೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿರೀಸಾವೆ ಪ್ರಥಮ ದರ್ಜೆ ಕಾಲೇಜಿನ ಹೆಚ್ಚಿನ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು ಮತ್ತಷ್ಟು ಅಭಿವೃದ್ಧಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಮಾಫಿಯಾ ತಲೆದೋರುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಪುಸ್ತಕಗಳನ್ನು ಸ್ನೇಹಿತರನ್ನಾಗಿ ಹಾಗೂ ವಿದ್ಯೆಯನ್ನು ದೀಕ್ಷೆಯಾಗಿ ಸ್ವೀಕರಿಸಿ ತಮ್ಮ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾಲಿಗೆಗೆ ಹೆಚ್ಚು ರುಚಿ ನೀಡುವ ಆಹಾರವು ಆರೋಗ್ಯಕ್ಕೆ ಅಷ್ಟೇ ಹಾನಿಕಾರಕವಾಗಿರುತ್ತದೆ. ಹಣ, ಆಸ್ತಿ ಸಂಪಾದನೆಗಿಂತ ಆರೋಗ್ಯ ಉಳಿಸಿಕೊಳ್ಳುವುದು ಅತಿ ಮುಖ್ಯವಾದ ಸಂಗತಿಯಾಗಿದೆ. ಪೌಷ್ಟಿಕ ಆಹಾರ ಸೇವನೆಯ ಜೊತೆಗೆ ಯೋಗ ಹಾಗೂ ಧ್ಯಾನವನ್ನು ದೈನಂದಿನ ಬದುಕಿನಲ್ಲಿ ದಿನಚರಿಯಾಗಿ ರೂಢಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬ್ಯಾಂಕಿಂಗ್ ವ್ಯವಹಾರದಲ್ಲಿ ಗೌಪ್ಯತೆ ಇರಲಿ. ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಗಳನ್ನು ಅಪರಿಚಿತರು ಹ್ಯಾಕ್ ಮಾಡಿ ಹಣ ದೋಚುವ ದಂದೆ ಮಾಡಿಕೊಂಡಿದ್ದಾರೆ. ಇದರಿಂದ ನಾಡಿನ ಜನತೆಯ 235 ಕೋಟಿ ರೂ. ಹಣ ಲೂಟಿಯಾಗಿದೆ. ಗ್ರಾಮೀಣ ಭಾಗದ ಜನತೆ ಕಷ್ಟಪಟ್ಟು ಕೂಡಿಟ್ಟ ಹಣ ಖದೀಮರ ಪಾಲಾಗುತ್ತಿದೆ. ದಯವಿಟ್ಟು ಜನತೆ ತಮ್ಮ ಬ್ಯಾಂಕ್ ವ್ಯವಹಾರದ ಬಗ್ಗೆ ಹೆಚ್ಚು ಜ್ಞಾನ ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಆಡಳಿತಾಧಿಕಾರಿ ಡಾ. ಎ.ಟಿ.ಶಿವರಾಮು ಮಾತನಾಡಿ, ನಮ್ಮಲ್ಲಿರುವ ಜ್ಞಾನವನ್ನು ಉತ್ತಮ ಕಾರ್ಯಗಳಿಗೆ ಸರಿಯಾಗಿ ಬಳಸಿಕೊಳ್ಳುವ ಮೂಲಕ ಸಮಾಜದ ಏಳಿಗೆಗೆ ಪೂರಕವಾಗಿ ಬದುಕುವುದು ಅಗತ್ಯ. ವಿಷಯ ಯಾವುದೇ ಆಗಲಿ ಅದನ್ನು ಅರಿಯುವ ಜ್ಞಾನ ಬೇಕು ಎಂದರು.










