ಹಾಸನ: ಶಾಸಕ ಎಚ್.ಪಿ. ಸ್ವರೂಪ್‌ಪ್ರಕಾಶ್ ಘೋಷಣೆ – “ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ತಕ್ಕ ಪಾಠ ಕಲಿಸಿದ್ದೇವೆ”

ಹಾಸನ : ಮಹಾನಗರಪಾಲಿಕೆ ಅಧ್ಯಕ್ಷರ ಚುನಾವಣೆಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹಾಸನ ಶಾಸಕರಾದ ಎಚ್.ಪಿ. ಸ್ವರೂಪ್‌ಪ್ರಕಾಶ್ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಇವತ್ತು ಕೆಲವು ಬಿಜೆಪಿ ಸದಸ್ಯರು, ಒಬ್ಬರು ಕಾಂಗ್ರೆಸ್ ಸದಸ್ಯರು ನಮ್ಮ ಜೊತೆ ಕೈಜೋಡಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್-ಬಿಜೆಪಿ ಸೇರಿ ಅವಿಶ್ವಾಸ ನಿರ್ಣಯ ಮಾಡಿದ್ದನ್ನು ಎಲ್ಲರೂ ನೋಡಿದ್ದೀರಿ” ಎಂದು ಹೇಳಿದರು.

ಚಂದ್ರೇಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆ ಚರ್ಚೆ ನಡೆದಿರುವುದನ್ನು ಉಲ್ಲೇಖಿಸಿದ ಅವರು, “ಆ ಸಂದರ್ಭದಲ್ಲಿ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಪಾಲಿಗೆ ಬಿಟ್ಟುಕೊಟ್ಟಿದ್ದೇವೆ. ಆದರೆ ಒಬ್ಬರು ಮೋಸ ಮಾಡಿದ್ದರಿಂದ ಎಲ್ಲರಿಗೂ ಅನ್ಯಾಯವಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು” ಎಂದರು.

ರಾಜಕೀಯದಲ್ಲಿ ಶಿಸ್ತು ಮತ್ತು ಪಕ್ಷನಿಷ್ಠೆ ಅಗತ್ಯವಿರುವುದನ್ನು ಒತ್ತಿ ಹೇಳಿದ ಸ್ವರೂಪ್‌ಪ್ರಕಾಶ್, “ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ತಕ್ಕ ಪಾಠ ಕಲಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಹಾಸನ ಮಹಾನಗರಪಾಲಿಕೆ ರಾಜಕೀಯದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮೈತ್ರಿಯ ಬದಲಾವಣೆಗಳು ಮತ್ತು ಒಳ ಗೊಂದಲಗಳು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿರುವುದಾಗಿ ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.