ಹಾಸನ: ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ವತಿಯಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಸ್ವರೂಪ್ ಪ್ರಕಾಶ್ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಆದರೆ ಸಿಬ್ಬಂದಿಗಳ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಒಂದಷ್ಟು ಸಮಸ್ಯೆಗಳಾಗುತ್ತಿವೆ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇನೆ ಎಂದರು.
ಹಾಸನ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವಾಹನಗಳ ಕೊರತೆ ಇರುವುದು ತನ್ನ ಗಮನಕ್ಕೆ ಬಂದ ನಂತರ ಖಾಸಗಿ ಆಸ್ಪತ್ರೆ ಮಾಲೀಕರ ಸಂಘದ ಸಹಯೋಗದಲ್ಲಿ ಒಂದು ಬೊಲೆರೋ ವಾಹನ ನೀಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಮೂರು ವಾಹನಗಳನ್ನು ನೀಡಲು ಯೋಚಿಸಲಾಗಿದೆ ಎಂದರು.

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಒಂದು ಹೆಚ್ಚುವರಿ ಪೊಲೀಸ್ ಠಾಣೆ ಹಾಗೂ ಹೆಚ್ಚುವರಿ ಸಿಬ್ಬಂದಿಗಳ ನೇಮಕಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು ಆದರೆ ಆಗುವುದಿಲ್ಲ ಎಂಬ ಉತ್ತರ ನೀಡುವ ಮೂಲಕ ಸರ್ಕಾರ ಹಾಸನವನ್ನು ಕಡೆಗಣಿಸಿದೆ. ಅಲ್ಲದೆ ಶಾಸಕರಿಗೆ ಬರುವ ಅನುದಾನವನ್ನು ಕಡಿತಗೊಳಿಸಿ ಅಭಿವೃದ್ಧಿಗೆ ಮಾರಕವಾಗಿದೆ ಮುಂದಿನ ದಿನಗಳಲ್ಲಾದರೂ ಹೆಚ್ಚಿನ ಅನುದಾನ ಹಾಗೂ ಹೆಚ್ಚಿನ ಸಿಬ್ಬಂದಿಗಳ ನೇಮಕ ಮಾಡಿ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.
ಹಾಸನ ನಗರ ಭಾಗದಲ್ಲಿ ಪ್ರತಿದಿನ 12 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ, ಅದಕ್ಕನುಗುಣವಾಗಿ ಪೋಲಿಸ್ ಇಲಾಖೆಗೆ ಸಿಬ್ಬಂದಿಗಳ ನೇಮಕವಾಗಬೇಕು ಇದಲ್ಲದೆ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ್ದು ಅದಕ್ಕೂ ಮುಂದಿನ ಮೂರು ವರ್ಷಗಳ ಕಾಲ ಅನುದಾನ ನೀಡಲು ಆಗುವುದಿಲ್ಲ ಎಂಬ ಲಿಖಿತ ಉತ್ತರ ನೀಡಿದ್ದಾರೆ ಇದು ಬೇಸರ ತಂದಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದಾಗಿ ಅನುದಾನವಿಲ್ಲದೆ ಶಾಸಕರು ಕಂಗಾಲಾಗಿದ್ದಾರೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಟ್ಟುಕೊಂಡು ಬೇರೆ ಅಭಿವೃದ್ಧಿ ಮಾಡದೆ ನಿರ್ಲಕ್ಷ ತೋರಿದೆ, ಮುಂದಿನ ಬಜೆಟ್ ಅಧಿವೇಶನದಲ್ಲಾದರೂ ಹಾಸನಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದು ಮನವಿ ಮಾಡಿದರು.










