ಹಾಸನ ನ.14: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರಕ್ಕೆ ಜಿಲ್ಲಾಡಳಿತದಿಂದ ಗೌರವ ಸಮರ್ಪಿಸಲಾಯಿತು.
ಆದಿಚುಂಚನಗಿರಿ ಮಠದ ಶಂಭುನಾಥ ಸ್ವಾಮೀಜಿ,
ಸಂಸದ ಶ್ರೇಯಸ್ ಎಂ ಪಟೇಲ್, ಶಾಸಕರಾದ ಎ.ಮಂಜು, ಸ್ವರೂಪ್ ಪ್ರಕಾಶ್, ಮಹಾನಗರ ಪಾಲಿಕೆಯ ಮೇಯರ್ ಗಿರೀಶ್ ಚೆನ್ನವೀರಪ್ಪ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಉಪಾಧ್ಯಕ್ಷರಾದ ಎನ್. ನಂಜುಂಡೇಗೌಡ, ಪ್ರಕಾಶ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ, ಮುಗ್ದ ಮನಸ್ಸಿನ ಸಾಲು ಮರದ ತಿಮ್ಮಕ್ಕ ಅವರು ಸಮಾಜಕ್ಕೆ ಅಮೋಘ ಸೇವೆಯನ್ನು ಸಲ್ಲಿಸಿದ್ದಾರೆ. ಶ್ರೀ ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ನಿಷ್ಕಲ್ಮಶ ಮನಸ್ಸಿನ ಮಾತೆಯಿಂದ ತಮಗೆ ಆಶೀರ್ವಾದ ದೊರೆತಿದ್ದನ್ನು ನೆನಪು ಮಾಡಿಕೊಂಡರು. ಹಿರಿಯ ಚೇತನದ ಸಾಧನೆ ಬಗ್ಗೆ ಮೆಲುಕು ಹಾಕಿದರಲ್ಲದೆ ಅವರ ದರ್ಶನ ಭಾಗ್ಯ ದೊರೆತಿಸದ್ದು ತಮ್ಮ ಪುಣ್ಯ ಎಂದರು.










