Hassan: ಸಕಲೇಶಪುರದ ಮುಂಗಾರಿನ ವೈಭವ ಕಣ್ತುಂಬಿಕೊಳ್ಳಲು ಟ್ರಕ್ಕಿಂಗ್ ಪ್ಲಾನ್ ಮಾಡ್ತಿದ್ದೀರಾ? ಚಾನ್ಸೇ ಇಲ್ಲ, ತಕ್ಷಣ ಕ್ಯಾನ್ಸಲ್‌ ಮಾಡಿ!

Hassan|ಹಾಸನ (Kannadapost.com): ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ತಾಲ್ಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಜಲಪಾತಗಳು ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಆದೇಶ ಹೊರಡಿಸಿದ್ದಾರೆ.

​ಕಳೆದ ಕೆಲವು ದಿನಗಳಿಂದ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾಗುವ ತೀವ್ರ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿ ರಕ್ಷಣೆಗಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ.

ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್!

ಅಪಾಯಕಾರಿ ಸ್ಥಳಗಳಾದ ಜಲಪಾತಗಳು, ನದಿ-ಹಳ್ಳಗಳು ಹಾಗೂ ಗುಡ್ಡ ಪ್ರದೇಶಗಳಿಗೆ ತೆರಳದಂತೆ ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಒಂದು ವೇಳೆ ತಾಲೂಕು ಆಡಳಿತದ ಈ ಆದೇಶವನ್ನು ಉಲ್ಲಂಘಿಸಿ ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡಿದರೆ, ಅಂಥವರ ವಿರುದ್ಧ ನೇರವಾಗಿ ‘ಕ್ರಿಮಿನಲ್ ಪ್ರಕರಣ’ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ:

ಈ ನಿಷೇಧಾಜ್ಞೆ ತಾಲ್ಲೂಕಿನಲ್ಲಿರುವ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರಿಗೂ ಕಡ್ಡಾಯವಾಗಿ ಅನ್ವಯಿಸುತ್ತದೆ.

  • ​ಮುಂದಿನ ಆದೇಶದವರೆಗೂ ಪ್ರವಾಸಿಗರಿಗೆ ಯಾವುದೇ ರೀತಿಯ ಟ್ರೆಕ್ಕಿಂಗ್ (Trekking) ವ್ಯವಸ್ಥೆಯನ್ನು ಕಲ್ಪಿಸುವಂತಿಲ್ಲ.
  • ​ಒಂದು ವೇಳೆ ನಿಯಮ ಮೀರಿ ಟ್ರೆಕ್ಕಿಂಗ್ ಆಯೋಜಿಸಿ ಏನೇ ಅನಾಹುತಗಳಾದರೂ ಅದಕ್ಕೆ ಆಯಾ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಹಶೀಲ್ದಾರ್ ಸುಪ್ರಿತಾ ಎಚ್ಚರಿಸಿದ್ದಾರೆ.

​ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಆಡಳಿತ ಮಂಡಳಿಯ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸುವಂತೆ ಕೋರಲಾಗಿದೆ.