
ಹಾವೇರಿಯ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಸುಮಾ ಸವಣೂರು ಅವರನ್ನು ಮಚ್ಚಿನಿಂದ ಕೊಲೆ ಮಾಡಿದ ಆರೋಪದಡಿ ತಮ್ಮ ಸಂಜೀವನನ್ನು ಪೊಲೀಸರು ಬಂಧಿಸಿದ್ದಾರೆ.
ಹಾವೇರಿ,ಮೇ,25,2026(www.kannadapost.com): ಇಲ್ಲಿಯ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಸುಮಾ ಸವಣೂರು (29) ಅವರನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿದ ಆರೋಪದಡಿ ಅವರ ತಮ್ಮ ಸಂಜೀವ (27) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳದ ಸುಮಾ ಹಲವು ವರ್ಷಗಳಿಂದ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.
ಕೌಟುಂಬಿಕ ವಿಚಾರಕ್ಕೆ ತಮ್ಮನೇ ಅವರನ್ನು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ ತಾರಿಹಾಳದಿಂದ ಸುಮಾ ಶಿಗ್ಗಾವಿಗೆ ಬಂದಿದ್ದರು. ಆರೋಪಿ ಸಂಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಎನ್ನಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಬಂದಿದ್ದ ಸುಮಾ ಒಳಗೆ ಹೋಗುತ್ತಿದ್ದ ವೇಳೆ, ಇನ್ನೂ ಮಕ್ಕಳು ಕೇಂದ್ರಕ್ಕೆ ಬಂದಿರಲಿಲ್ಲ. ಅದೇ ಸಂದರ್ಭದಲ್ಲಿ ಆರೋಪಿ ದಾಳಿ ನಡೆಸಿ, ಮಚ್ಚಿನಿಂದ ಕೈ, ಕತ್ತು ಹಾಗೂ ಇತರೆ ಭಾಗಗಳಿಗೆ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ತೀವ್ರ ರಕ್ತಸ್ರಾವದಿಂದ ಸುಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಕೊಲೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.









