ಆರೋಗ್ಯ ಕಾಳಜಿ ವಹಿಸಲು ಶಾಸಕ ಬಾಲಕೃಷ್ಣ ಸಲಹೆ

ಚನ್ನರಾಯಪಟ್ಟಣ: ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ರೈತರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ತಾಲೂಕಿನ ಹಿರೀಸಾವೆ ಗ್ರಾಮದ ಶ್ರೀ ಚೌಡೇಶ್ವರಿ ಸಮುದಾಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್, ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕಾಲಭೈರವೇಶ್ವರಸ್ವಾಮಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋನಾ ಕೇಂದ್ರದ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು. ಇದರಿಂದ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಅನುಕೂಲವಾಗಲಿದೆ. ಪ್ರತಿಯೊಬ್ಬರೂ ಸಹ ವರ್ಷದಲ್ಲಿ ೨-೩ ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು ಎಂದು ತಿಳಿಸಿದರು.

ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬದಲಾವಣೆಯೇ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಕೆಲವೆಡೆ ರಸ್ತೆ ಬದಿಯಲ್ಲಿ ಮಾರಾಟ ಮಾಡುವ ಗೋಬಿ ಸೇರಿದಂತೆ ಇತರೆ ಆಹಾರಗಳಲ್ಲಿ ಕೆಮಿಕಲ್ ಅಂಶಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ವ್ಯಾಪಾರ ಮಾಡಿ ಆದರೆ ಅಪಾಯಕಾರಿ ಅಂಶಗಳಿರುವ ಪದಾರ್ಥಗಳನ್ನು ಬಳಸಬೇಡಿ. ಇದರಿಂದ ಜನಸಾಮಾನ್ಯರು ಆರೋಗ್ಯದ ಜತೆಗೆ ಪ್ರಾಣ ಕಳೆದುಕೊಳ್ಳುತಿದ್ದಾರೆ ಎಂದು ಎಚ್ಚರಿಸಿದರು.