ಆಲೂರು : ರಾಜ್ಯದಲ್ಲಿ ಬಹುತೇಕ ರಸ್ತೆಗಳು ಗುಂಡಿಗಳಿಂದ ತುಂಬಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಶಾಸಕ ಸಿಮೆಂಟ್ ಮಂಜು ಪ್ರತಿಭಟನೆ ನಡೆಸಿದರು. ಬುಧುವಾರ ತಾಲ್ಲೂಕಿನ ಚಿನ್ನಳ್ಳಿ, ಅಬ್ಬನ ಗ್ರಾಮದಲ್ಲಿ ಹಾದು ಹೋಗಿರುವ ಲೋಕೋಪಯೋಗಿ ಇಲಾಖೆ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಗೆ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ಶಾಸಕರು,ರಾಜ್ಯ ಸರ್ಕಾರ ಬೆಂಗಳೂರನ್ನು ಗ್ರೇಟರ್ ಬೆಂಗಳೂರನ್ನಾಗಿ ಮಾಡಲು ಮುಂದಾಗಿದೆ ಆದರೆ ರಸ್ತೆಗಳಲ್ಲಿರುವಂತಹ ಗುಂಡಿಗಳನ್ನು ಮುಚ್ಚಲು ಸರ್ಕಾರದಲ್ಲಿ ಹಣದ ಕೊರತೆ ಇದೆ.
ತೆರಿಗೆಯಿಂದ ಬಂದಂತಹ ಎಲ್ಲಾ ಹಣವನ್ನು ಗ್ಯಾರೆಂಟಿಗಳಿಗೆ ಬಳಕೆ ಮಾಡುವುದರ ಮೂಲಕ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯ ಕುಂಠಿತವಾಗಿದ್ದು, ಇದರಿಂದ ರಾಜ್ಯದ ಜನತೆಗೆ ಗುಂಡಿಗಳ ಭಾಗ್ಯವನ್ನು ನೀಡಿದೆ ಈ ಬಾರಿ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸರ್ಕಾರ ಶೀಘ್ರವಾಗಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾಡಾನೆ ಸೇರಿದಂತೆ ಇನ್ನಿತರ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ರಾತ್ರಿ ವೇಳೆ ಗುಂಡಿ ರಸ್ತೆಯಲ್ಲಿ ಸಂಚಾರ ನಡೆಸುವುದಕ್ಕೆ ಸಾಧ್ಯವಾಗುತ್ತಿಲ್ಲ ಈಗ ನೀಡುತ್ತಿರುವ ಅನುದಾನದಿಂದ ನಿರೀಕ್ಷಿತವಾಗಿ ಕೆಲಸ ಮಾಡುವ ಸಾಧ್ಯವಾಗುತ್ತಿಲ್ಲ.
ಕ್ಷೇತ್ರಕ್ಕೆ ತೆರಳಿದ ವೇಳೆ ಸಾರ್ವಜನಿಕರು ಶಾಸಕರನ್ನ ಪ್ರಶ್ನೆ ಮಾಡುವ ಸ್ಥಿತಿ ಬಂದಿದೆ.ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಇರುವುದರಿಂದ ವಾಹನ ಸವಾರರು ಬಿದ್ದು ಕೈ ಕಾಲು ಮುರಿದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೂ ಸಹ ಈ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ಗ್ರೇಟರ್ ಬೆಂಗಳೂರು ಮಾಡುವ ಮೊದಲು ರಾಜ್ಯದಲ್ಲಿನ ರಸ್ತೆಗಳ ಗುಂಡಿಗಳನ್ನು ಮುಚ್ಚುವುದಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಮಾತನಾಡಿ,ಸರ್ಕಾರ ದಲಿತ ಮೀಸಲಾತಿ ವಿರೋಧಿ, ರೈತ ವಿರೋಧಿ, ಭ್ರಷ್ಟಾಚಾರದ ಸರ್ಕಾರ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಅಲೂರು ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ಪೂವಯ್ಯ, ಗಣೇಶ್, ಶಿವಕುಮಾರ್, ಸಂಪತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.










