ಬೆಂಗಳೂರು,ಜೂನ್ 5,(www.kannadapost.com): ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗರೆಡ್ಡಿ, ತಾವು ಕಾಂಗ್ರೆಸ್ ಶಾಸಕನಾಗಿಯೇ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ವೈಯಕ್ತಿಕ ಅಸಮಾಧಾನ ಅಥವಾ ಕೋಪವಿಲ್ಲ ಎಂದು ಹೇಳಿದರು.
“ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಡಿ.ಕೆ. ಶಿವಕುಮಾರ್ ಅವರು ಎರಡು ಬಾರಿ ಕರೆದು ಖಾತೆ ಕುರಿತು ಭರವಸೆ ನೀಡಿದ್ದರು. ಆದರೆ ಕೊನೆಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಈ ನಿರ್ಧಾರದಿಂದ ನನಗೆ ಬೇಸರವಾಗಿದೆ” ಎಂದು ಹೇಳಿದರು.
“ನಾನು ಯಾರ ಬಳಿಯೂ ಮಂತ್ರಿಗಿರಿ ಕೇಳಿರಲಿಲ್ಲ. ಸಿದ್ದರಾಮಯ್ಯ ಅವರ ಬಳಿಯೂ ಕೇಳಿರಲಿಲ್ಲ, ಡಿ.ಕೆ. ಶಿವಕುಮಾರ್ ಅವರ ಬಳಿಯೂ ಕೇಳಿರಲಿಲ್ಲ ಹಾಗೂ ಹೈಕಮಾಂಡ್ ಬಳಿಯೂ ಬೇಡಿಕೆ ಇಟ್ಟಿರಲಿಲ್ಲ. ಪಕ್ಷವೇ ನನ್ನನ್ನು ಸಚಿವನನ್ನಾಗಿ ಮಾಡಿತ್ತು. ಆದರೆ ನೀಡಿದ ಭರವಸೆ ಈಡೇರದ ಕಾರಣ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದರು.
ಆದಾಗ್ಯೂ, ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆ ಅಚಲವಾಗಿದ್ದು, ಕಾಂಗ್ರೆಸ್ ಶಾಸಕನಾಗಿಯೇ ಕಾರ್ಯನಿರ್ವಹಿಸುತ್ತೇನೆ ಎಂದು ರಾಮಲಿಂಗರೆಡ್ಡಿ ಪುನರುಚ್ಚರಿಸಿದರು.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ.










