ಮಾಡಾಳು: ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ ಸೌಹಾರ್ದ ಸಹಕಾರ ಸಂಘದ 2024-25 ನೇ ಸಾಲಿನ ಚೊಚ್ಚಲ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ಬಡವ ಬಲ್ಲಿದ ಎಂಬ ತಾರತಮ್ಯ ಇಲ್ಲದೆ ಉತ್ತಮ ಮನೋಭಾವ ಹೊಂದಿ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತವೆ. ಹಾಗೆಯೇ ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ ಮೂಲಕ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸ್ವಾಮೀಜಿ ಕಿವಿಮಾತು ಹೇಳಿದರು.
ಗ್ರಾಮೀಣ ಭಾಗದಲ್ಲಿ ಇಂತಹ ಸಹಕಾರ ಸಂಘಗಳನ್ನು ಸ್ಥಾಪಿಸಿ ಆರ್ಥಿಕ ಹಿನ್ನಡೆಯಲ್ಲಿರುವ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿದಾಗ ಮಾತ್ರ ಅವರ ಬದುಕು ಹಸನಾಗುತ್ತದೆ ಎಂದರು. ಮೈಸೂರಿನ ಸೌಹಾರ್ದ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ಸಲಹೆಗಾರರಾದ ಶೇಖರ್ ಕೌಂಡಿನ್ಯ ಅವರು ಸಹಕಾರ ಸಂಘಗಳ ಕಾರ್ಯವೈಖರಿ ಬಗ್ಗೆ ಮಾತನಾಡಿದರು.
ಸಹಕಾರಿ ಸಂಘದ ಉಪಾಧ್ಯಕ್ಷ ಎನ್.ಜಿ ಮರುಳಸಿದ್ಧಸ್ವಾಮಿ ನಾಗಸಮುದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆರಂಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಆರ್.ಬಿ ಸುಷ್ಮಾ, 24-25ನೇ ಸಾಲಿನ ವರದಿ ಓದಿದರು. ಅರಸೀಕೆರೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಎಸ್.ಎಂ ಗಂಗಾಧರ್, ನಿರ್ದೇಶಕ ಎಲ್.ಸಿ.ಚಂದ್ರಪ್ಪ ಹೆಚ್ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ, ಜಿ.ಪಂ ಮಾಜಿ ಸದಸ್ಯ ಎಂ.ಎಸ್.ವಿ.ಸ್ವಾಮಿ, ಗ್ರಾಪಂ ಸದಸ್ಯ ಕೊಡ್ಲಿ ಬಸವರಾಜ್, ಮುಖಂಡರಾದ ಮಾಡಾಳು ಶಿವಲಿಂಗಪ್ಪ ಇದ್ದರು.










