ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಹಾಗೂ ನಿಗೂಢವಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ಪರ ಹೋರಾಟ ನಡೆಸುತ್ತಿದ್ದ ಮಹೇಶ್ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮನ್ನು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ತಿಮರೋಡಿ ಪರ ವಕೀಲರು ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ರಜಾಕಾಲೀನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರು ಗಡಿಪಾರಿಗೆ ತಡೆಯಾಜ್ಞೆ ನೀಡಿ ಆರೋಪಿ ವಿರುದ್ದ ಯಾವುದೇ ರೀತಿಯ ಬಲವಂತದ ಕ್ರಮ ಬೇಡ ಎಂದು ನಿರ್ದೇಶನ ನೀಡಿತು.
ಮುಂದಿನ ಅ.8ರವರೆಗೆ ಗಡಿಪಾರು ಮಾಡದಂತೆ ಸೂಚನೆ ನೀಡಿದ ನ್ಯಾಯಾಧೀಶರು ರಾಜ್ಯ ಗೃಹ ಇಲಾಖೆ ಪುತ್ತೂರು ಸಹಾಯಕ ಆಯುಕ್ತರು, ಭಂಟ್ವಾಳ ಉಪವಿಭಾಗದ ಉಪಪೊಲೀಸ್ ವರಿಷ್ಠಾಧಿಕಾರಿ ಮತ್ತು ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರಿಗೂ ನೋಟಿಸ್ ಜಾರಿ ಮಾಡಿದೆ.
ತಮ ವಿರುದ್ಧ ಹೊರಡಿಸಿರು ಗಡಿಪಾರು ಆದೇಶವನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೂ ಆದೇಶ ಜಾರಿಗೆ ತಡೆ ನೀಡುವಂತೆ ತಿಮರೋಡಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು.










